Saturday, September 5, 2009

ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ತಳಹದಿ - ಸಚಿವ ಪಾಲೇಮಾರ್

ಮಂಗಳೂರು,ಸೆ.5:ಗುರುಶಿಷ್ಯರ ಸಂಬಂಧ ವೃದ್ಧಿ ಇಂದಿನ ತುರ್ತು ಅಗತ್ಯವಾಗಿದ್ದು, ಉತ್ತಮ ಶಿಕ್ಷಣ ಮತ್ತು ಸಂಸ್ಕಾರದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೃಷ್ಣ ಜೆ. ಪಾಲೇಮಾರ್ ಹೇಳಿದರು.
ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾ ಕ್ಷೇತ್ರದಲ್ಲಿನ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಅತೃಪ್ತಿಯನ್ನು ವ್ಯಕ್ತಪಡಿಸಿದರು. ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಸ್ಪರ ಗೌರವ, ಆದರಗಳಿಂದ ನಡೆದರೆ ಮಾತ್ರ ಉತ್ತಮ ಸಮಾಜ ಸೃಷ್ಟಿಯಾಗಬಲ್ಲದು, ಈ ನಿಟ್ಟಿನಲ್ಲಿ ಚಿಂತನೆ ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟ ಅವರು, 580 ಪ್ರಾಥಮಿಕ ಶಾಲೆ, 300 ಪ್ರೌಢಶಾಲೆಗಳಿಗೆ 20,000ಕ್ಕೂ ಮೀರಿ ಶಿಕ್ಷಕರ ನೇಮಕಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು.
ಯಾವುದೇ ಮಗುವು ವಿದ್ಯೆಯಿಂದ ವಂಚಿತವಾಗದಿರಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಶಿಕ್ಷಕರ ವೇತನದಲ್ಲೂ ಲೋಪವಾಗದಂತೆ ಕ್ರಮ ಕೈಗೊಳ್ಳಲಾಗಿದೆ; ಇದಕ್ಕೆ ಪೂರಕವಾಗಿ ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳು ಸ್ಪಂದಿಸಬೇಕು ಕರೆ ನೀಡಿದರು. ಸಮಾರಂಭದಲ್ಲಿ 12 ಮ0ದಿ ಶಿಕ್ಷಕರಿಗೆ ಜಿಲ್ಲಾ ಪ್ರಶಸ್ತಿ ಮತ್ತು 5 ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.