
ವಿದ್ಯಾಂಗ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಣದ ಬಗ್ಗೆ ಮತ್ತು ಶಾಲೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕೆಂದು ಅವರು ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸದಸ್ಯರು ಶಾಸಕರು ಹಾಗೂ ಸಚಿವರೊಂದಿಗೆ ನಿಕಟ ಸಂಪರ್ಕವನ್ನಿರಿಸಿಕೊಂಡು ತಂತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳ ಬಗ್ಗೆ ಆಸಕ್ತಿ ವಹಿಸಬೇಕು ಎಂದ ಅವರು,ತಮ್ಮ ಅನುದಾನವನ್ನು ಶಾಲೆಗಳ ಅಭಿವೃದ್ಧಿಗೆ ಸದ್ವಿನಿಯೋಗ ಮಾಡಿ ಎಂದು ಸಲಹೆ ಮಾಡಿದರು.ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಆರೋಪಗಳ ವಿಚಾರಣೆಗಳನ್ನು ನಿಗದಿತ ಸಮಯಮಿತಿಯೊಳಗೆ ಮುಗಿಸುವಂತೆಯೂ ಅವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.
ಸಾವಯವ ಕೃಷಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತಂತೆ ಸದಸ್ಯರು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಕೃಷಿಇಲಾಖೆ ಜಂಟಿ ನಿರ್ದೇಶಕರು, 13 ಜನ ಅಧಿಕಾರೇತೆರ ಸದಸ್ಯರು ಹಾಗೂ 9ಜನ ಅಧಿಕಾರಿಗಳು ಸಾವಯವ ಕೃಷಿ ಮಿಷನ್ ಯೋಜನೆಯಡಿ ಫಲಾನುಭವಿಗಳನ್ನು ಸರ್ಕಾರದ ಮಾರ್ಗದರ್ಶನದಂತೆ ಆಯ್ಕೆ ಮಾಡಿರುತ್ತಾರೆ ಎಂದರು. ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರಲ್ಲಿ 7 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ,ಪುತ್ತೂರು, ಸುಳ್ಯ ತಾಲೂಕುಗಳಿಗೆ ತಲಾ 24.5 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದರು.ಪ್ರತಿ ತಾಲೂಕಿನ 300 ರೈತರಿಗೆ ಸೌಲಭ್ಯ ನೀಡು ವ ಯೋಜನೆಯಿದೆ ಎಂದು ಹೇಳಿದರು

ಪಡಿತರ ಚೀಟಿ ವಿತರಣೆ, ಎಚ್ 1 ಎನ್ 1 ಬಗ್ಗೆ, ತೋಟಗಾರಿಕಾ ಇಲಾಖೆಯಲ್ಲಿ ಇಂಗುಗುಂಡಿ ನಿರ್ಮಾಣ ಮಾಡುವ ಬಗ್ಗೆ ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.ರಾಜೀವ್ ಗಾಂಧಿ ವಿದ್ಯುದೀಕರಣ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಜಿ.ಪಂ.ನಲ್ಲಿ ನಿರ್ಣಯ ತೆಗೆದುಕೊಂಡು ಯೋಜನೆಯನ್ನು ಆದ್ಯತೆಯ ಮೇಲೆ ಜಿಲ್ಲೆಗೆ ಪಡೆದುಕೊಳ್ಳುವ ಬಗ್ಗೆ ನಿರ್ಣಯಿಸಲಾಯಿತು.ಸಭೆಯಲ್ಲಿ ಜಿಲ್ಲಾಪಂಚಾಯತ್ ಉಪಾಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್,ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಜಿ. ಸದಾನಂದ ಮಲ್ಲಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿಸಮಿತಿ ಅಧ್ಯಕ್ಷ ರಾಜಶ್ರೀ ಹೆಗಡೆ ಉಪಸ್ಥಿತರಿದ್ದರು.