Monday, March 22, 2010

2008/09 ರ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಮಂಗಳೂರು,ಮಾರ್ಚ್22: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಆಶ್ರಯದಲ್ಲಿ ಯಕ್ಷಗಾನ ಕಲಾವಿದರಿಗೆ 2008 ಮತ್ತು 2009 ರ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು. ಶಾಸಕ ವಸಂತ ಬಂಗೇರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕಲಾವಿದರಿಗೆ ಆರೋಗ್ಯ ವಿಮೆ, ನಿವೃತ್ತಿ ವಿಮೆ,ಮತ್ತು ನಿವೃತ್ತಿ ವೇತನ ದೊರಕಿಸಿ ಕೊಡುವ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಹೇಳಿದರು.
ಸಮಾರಂಭ ವನ್ನುದ್ದೇಶಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖಾ ಕಾರ್ಯದರ್ಶಿ ಬಿ. ಆರ್. ಜಯರಾಮರಾಜೇ ಅರಸ್ ಅವರು, 400 ಯಕ್ಷಗಾನ ಕಲಾವಿದರಿಗೆ ಸರ್ಕಾರದ ವತಿಯಿಂದ ಮಾಶಾಸನ ನೀಡಲು ಚಿಂತನೆ ನಡೆಸಲಾಗಿದ್ದು ಇದಕ್ಕೆ ಮುಖ್ಯ ಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ,ಮಾಶಾಸನವನ್ನು 3 ಸಾವಿರ ರೂಪಾಯಿಗಳಿಂದ 12 ಸಾವಿರಕ್ಕೆ ಏರಿಸಲು ಶಿಫಾರಸ್ಸು ಮಾಡಲಾಗಿದೆ. ಮುಂದಿನ ವರ್ಷದಿಂದ ಪಾರ್ತಿಸುಬ್ಬ ಯಕ್ಷಗಾನ ಪ್ರಶಸ್ತಿಯನ್ನು 1 ಲಕ್ಷ ರೂ. ಮೊತ್ತದೊಂದಿಗೆ ಪ್ರದಾನ ಮಾಡಲಾಗುವುದು.ಯಕ್ಷಗಾನಕ್ಕೆ ಸಾಂಸ್ಕೃತಿಕ ಪರಂಪರೆ ಇರುವ ಹಿನ್ನಲೆಯಲ್ಲಿ ಯುನೆಸ್ಕೋ ಮನ್ನಣೆ ಸಿಗುವಂತಾಗಲು ಪ್ರಯತ್ನಗಳು ಮುಂದುವರೆದಿವೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್ ಅವರು ಪ್ರಶಸ್ತಿಯ ಕಿರು ಹೊತ್ತಿಗೆಯನ್ನು ಬಿಡುಗಡೆ ಗೊಳಿಸಿದರು. ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತರ ಪರವಾಗಿ ಎಚ್.ಸುಬ್ಬಣ್ಣ ಭಟ್, ಎಂ. ಕೆ. ರಮೇಶ್ ಆಚಾರ್ಯ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಕುಂಬ್ಳೆ ಸುಂದರ್ ರಾವ್ ಅವರು ಪ್ರಾಸ್ತವಿಕವಾಗಿ ಮಾತನಾಡಿದರು.ಅಕಾಡೆಮಿ ರಿಜಿಸ್ಟ್ರಾರ್ ನಾರಾಯಣ ಸ್ವಾಮಿ ಸ್ವಾಗತಿಸಿದರು.ಅಕಾಡಮಿ ಸದಸ್ಯ ಮುರಳಿ ಕಡೆಕಾರ್ ಅವರು ವಂದಿಸಿದರು.ಪ್ರೊ.ಸುಗ್ಗನಬಳ್ಳಿ ಕಾರ್ಯಕ್ರಮ ನಿರೂಪಣೆ ಮಾಡಿದರು.