ಇಂದು ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಆರೋಗ್ಯ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದರೂ ಜಿಲ್ಲೆಯಿಂದ ಅಪೌಷ್ಠಿಕ ಮಕ್ಕಳ ಪ್ರಕರಣಗಳು ವರದಿಯಾಗುತ್ತಿದೆ. ಅಪೌಷ್ಠಿಕ ಮಕ್ಕಳ ಪತ್ತೆಗೆ ಪೌಷ್ಠಿಕಾಂಶದ ಕೊರತೆ ಮಾತ್ರ ಕಾರಣವಾಗದೆ, ಮಗುವಿನ ಆರೋಗ್ಯ ತಾಯಿಯ ಗರ್ಭದಿಂದಲೇ ಆರಂಭವಾಗುತ್ತದೆ ಎಂಬ ಅಂಶವನ್ನು ಎಲ್ಲರೂ ಮನಗಾಣಬೇಕು. ಹಾಗಾಗಿ ಹೆಣ್ಣು ಮಕ್ಕಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯದ ಅರಿವನ್ನು ಮೂಡಿಸುವ ಮಹತ್ತರ ಹೊಣೆಗಾರಿಕೆ ಆರೋಗ್ಯ ಇಲಾಖೆಗೆ ಇದೆ ಎಂದರು. ಆರೋಗ್ಯ ಇಲಾಖೆಗೆ ಇಂದು 32 ಕೋಟಿಗೂ ಮಿಕ್ಕಿ ಅನುದಾನ ಬರುತ್ತಿದ್ದು, ಜನರ ಆರೋಗ್ಯವನ್ನು ಗಮನದಲ್ಲಿರಿಸಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ರೂಪಿಸಲ್ಪಟ್ಟಿದೆ ಎಂದರು.
ಇಂದಿನ ಪ್ರಶಸ್ತಿ ಪ್ರದಾನ ಸಮಾರಂಭ ಒಳ್ಳೆಯ ಕೆಲಸಗಾರರನ್ನು ಗುರುತಿಸಿದೆ; ಪ್ರೋತ್ಸಾಹಿಸಿದೆ. ಇಂತಹ ಮಾದರಿ ಕಾರ್ಯಕ್ರಮ ಒಳ್ಳೆಯ ಕೆಲಸಕ್ಕೆ ಸ್ಫೂರ್ತಿಯಾಗಲಿ ಎಂದರು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಕೆ ಎನ್ ವಿಜಯಪ್ರಕಾಶ್ ಮಾತನಾಡಿ, ಶಿಶು ಮರಣ ಪ್ರಮಾಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಇದೆ. ಇಲಾಖೆಗಳು ಆರ್ಥಿಕ ಮತ್ತು ಭೌತಿಕ ಗುರಿಗೆ ತಮ್ಮನ್ನು ಸೀಮಿತಗೊಳಿಸದೆ ಮಾನವೀಯವಾಗಿ ಕರ್ತವ್ಯ ಪ್ರಜ್ಞೆ ಮೆರೆದರೆ ಆಡಳಿತದ ಬಗ್ಗೆ ಜನರಿಗೆ ಉತ್ತಮ ಅಭಿಪ್ರಾಯ ಮೂಡಲು ಸಾಧ್ಯ ಎಂದರು. ಆರೋಗ್ಯ ಇಲಾಖೆ ಗ್ರಾಮೀಣ ಹಾಗೂ ಹಿಂದುಳಿದ ವರ್ಗದವರನ್ನು ಸ್ಪಂದಿಸಬೇಕು ಎಂದರು.
ಜಿಲ್ಲಾ ಮಟ್ಟದ ಪ್ರಶಸ್ತಿ ವಿಜೇತರು:
ಬೆಳ್ತಂಗಡಿಯ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾದ ಗೀತಾಕುಮಾರಿ, ಸುಳ್ಯ ತಾಲೂಕಿನ ಅರಂತೋಡು ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯಾದ ಎನ್.ಎಲ್ .ಬೇಬಿ, ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯ ಕಿರಿಯ ಪುರುಷ ಆರೋಗ್ಯ ಸಹಾಯಕರಾದ ಅನ್ವರ್ ಹುಸೇನ್, ಪುತ್ತೂರು ತಾಲೂಕಿನ ಕಡಬದ ಹಿರಿಯ ಪುರುಷ ಆರೋಗ್ಯ ಸಹಾಯಕರಾದ ಲಕ್ಷ್ಮಣಗೌಡ, ಮಂಗಳೂರಿನ ಆರೋಗ್ಯ ಶಿಕ್ಷಣಾಧಿಕಾರಿಯಾದ ಜ್ಯೋತಿ, ಬೆಳ್ತಂಗಡಿ ತಾಲೂಕಿನ ಉಜಿರೆ ಪ್ರಾಥಮಿಕ ಕೇಂದ್ರದ ಉತ್ತಮ ಶುಶ್ರೂಷಕಿ ಜೋಯ್ಸ್ ಫೆರ್ನಾಂಡೀಸ್.
ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಸರೋಜ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಓ ಆರ್ ಶ್ರೀರಂಗಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ ರಾಮಕೃಷ್ಣ ರಾವ್ ಸ್ವಾಗತಿಸಿದರು. ಸಂಗೀತ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಪೇಗೌಡ ವಂದಿಸಿದರು.