
ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗನ್ನಾಥ್ ಅವರು ಮಕ್ಕಳೊಂದಿಗೆ ಸಂವಾದ ನಡೆಸಿ ಸೊಳ್ಳೆಯ ಕಡಿತದಿಂದ ರಕ್ಷಿಸಿಕೊಳ್ಳುವ ಬಗ್ಗೆ ಹಾಗೂ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವ ರೀತಿಯನ್ನು ವಿವರಿಸಿದರು. 2004ರಿಂದ ಜಿಲ್ಲೆಯಲ್ಲಿ ಮಲೇರಿಯಾ ರೋಗ ಕಡಿಮೆಯಾಗಿದ್ದು, ಜ್ವರ ಬಂದಲ್ಲಿ ತಕ್ಷಣ ರಕ್ತ ಪರೀಕ್ಷೆ ಮಾಡಿಸುವುದರಿಂದ ಚಿಕಿತ್ಸೆ ಪಡೆಯುವುದು ಸುಲಭ ಎಂದರು.ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ಪ್ರೊ. ಗಿರಿಧರ್ ಹತ್ವಾರ್, ಸಂಚಾಲಕರಾದ ಶ್ರೀಮತಿ ಉಮಾದೇವಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅರಣ್ ಕುಮಾರ್ ಅವರು ಮಲೇರಿಯಾ ಬಗ್ಗೆ ಉಪನ್ಯಾಸ ನೀಡಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೇಶವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಲತಾ ಕಾರ್ಯಕ್ರಮ ಸಂಯೋಜಿಸಿದ್ದರು. ಕ್ಷೇತ್ರ ಪ್ರಚಾರಾಧಿಕಾರಿ ಟಿ.ಬಿ. ನಂಜುಂಡ ಸ್ವಾಮಿ ಸ್ವಾಗತಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಈ ಸಂಬಂಧ ಕ್ಷೇತ್ರ ಪ್ರಚಾರ ಇಲಾಖೆ ವತಿಯಿಂದ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ನಾಲ್ಕು ಬಹುಮಾನಗಳನ್ನು ನೀಡಲಾಯಿತು. ಆರೋಗ್ಯ ಇಲಾಖೆ ವತಿಯಿಂದ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.